ಮುಖ್ಯಮಂತ್ರಿ ಭೇಟಿ - ಪ್ರತಿಭಟನೆಗೆ ಯತ್ನಿಸಿದವರು ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಸಿದ್ಧತೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ಕ್ಷೇತ್ರದ ನರಿಂಗಾನದಲ್ಲಿ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳಕ್ಕೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ಕದ್ರಿ- ನಂತೂರು ರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು. ಇದನ್ನರಿತ ಪೊಲೀಸರು ಮುಖ್ಯಮಂತ್ರಿ ಬರುವ ಮೊದಲೇ ಬಿಕೆ ಇಮ್ತಿಯಾಜ್ ನೇತೃತ್ವದಲ್ಲಿ ಸೇರಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಕಮ್ಯುನಿಸ್ಟ್ ಮತ್ತು ಡಿವೈಎಫ್ಐ ವತಿಯಿಂದ ಜನಪರ ವಿಚಾರಗಳಲ್ಲಿ ಪ್ರತಿಭಟನೆ ನಡೆಸಿದ್ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾಗಲೂ ಮುನೀರ್ ಕಾಟಿಪಳ್ಳ ಸೇರಿದಂತೆ ಕೆಲವರ ವಿರುದ್ಧ ಕೇಸು ದಾಖಲಿಸಲಾಗಿತ್ತು. ಇದನ್ನ ವಿರೋಧಿಸಿ ಕಮ್ಯುನಿಸ್ಟ್ ಮತ್ತು ಇತರ ಸಂಘಟನೆಗಳು ಪೊಲೀಸ್ ಕಮಿಷನರ್ ವಿರುದ್ಧ ಸರಣಿ ಪ್ರತಿಭಟನೆ ನಡೆಸಿದ್ದವು.