For the best experience, open
https://m.samyuktakarnataka.in
on your mobile browser.

ಅರವಿಂದ ಬೆಲ್ಲದ್‌ ನಡೆಯನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ

04:10 PM Sep 03, 2024 IST | Samyukta Karnataka
ಅರವಿಂದ ಬೆಲ್ಲದ್‌ ನಡೆಯನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ

ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಬೆಂಗಳೂರು: ಅರವಿಂದ ಬೆಲ್ಲದ್‌ ಅವರ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಂದಾಲ್ ಕುರಿತ ವಿಚಾರವಾಗಿ ಅದೇನು ನಿಮ್ಮ ಅಪ್ಪನ ಮನೆಯ ಆಸ್ತಿನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದ ಅರವಿಂದ ಬೆಲ್ಲದ ಅವರು ಪತ್ರದ ಮೂಲಕ ಕ್ಷಮೆಯಾಚಿಸಿದ್ದಾರೆ ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ. ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ.
ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದಿದ್ದಾರೆ.

Tags :