For the best experience, open
https://m.samyuktakarnataka.in
on your mobile browser.

ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ

05:00 PM Sep 04, 2024 IST | Samyukta Karnataka
ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ

ಹಾವೇರಿ(ಶಿಗ್ಗಾವಿ): ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಹೇಳಿದರು.
ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ ಸದಸ್ಯತಾ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ಕೊಟ್ಟು ಮಾತನಾಡಿದರು.
ಸೆಪ್ಟಂಬರ್ 6ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದೆ. ಅದಕ್ಕೂ ಪೂರ್ವದಲ್ಲಿ ಸವಣೂರು ಶಿಗ್ಗಾವಿ ತಾಲೂಕಿನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಬೇಕೆಂದು ಎರಡೂ ತಾಲೂಕು ಅಧ್ಯಕ್ಷರು‌ ಹಾಗೂ ಪಕ್ಷದ ಕಾರ್ಯಕರ್ತರು ಅಪೇಕ್ಷೆ ಪಟ್ಟಿರುವುದರಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಡುತ್ತಿದ್ದೇವೆ. ಹೋತನಹಳ್ಳಿ ಗ್ರಾಮದಿಂದ ಶ್ರೀಮಠದ ಆಶೀರ್ವಾದದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಇದೊಂದು ಶುಭ ಸಂಕೇತ, ಈ ಶುಭ ಸಂಕೇತದ ಅಭಿಯಾನವನ್ನು ಪ್ರತಿಯೊಂದು ಗ್ರಾಮಗಳಿಗೆ ತಲುಪಿಸಬೇಕು ಎಂದರು.
ಭಾರತೀಯ ಜನತಾ ಪಕ್ಷದ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರಿರುವ ದೊಡ್ಡ ಪಕ್ಷ, ಕಳೆದ ಬಾರಿ 7ಕೋಟಿ ಜನರು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬಾರಿ 10 ಕೋಟಿ ಸದಸ್ಯರನ್ನು ಮಾಡುವ ಗುರಿಯೊಂದಿಗೆ ನಮ್ಮ ರಾಷ್ಟ್ರೀಯ ನಾಯಕರು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಅವರ ಜನಪ್ರಿಯತೆ ಎಷ್ಟಿದೆ ಎಂದರೆ, ಪಂಡಿತ್ ಜವಾಹರಲಾಲ್ ನೆಹರು ಅವರ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ದಾಖಲೆ ಇವರದ್ದಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಅತ್ಯಂತ ಬಲಿಷ್ಠವಾಗಿ ಬೆಳೆಯುತ್ತಿರುವ ಪಕ್ಷ ಬಿಜೆಪಿ. ವಿರೋಧ ಪಕ್ಷಗಳು ಎಷ್ಟೇ ಅಪಪ್ರಚಾರ ಮಾಡಿದರೂ ಭಾರತದ ಜನ ಹಾಗೂ ಕರ್ನಾಟಕದ ಜನರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಂದು ವಿಪರ್ಯಾಸ ಏನಂದರೆ ನಾವು ಮೂರನೇ ಬಾರಿ ಅಧಿಕಾರ ನಡೆಸುತ್ತಿರುವಾಗ 50 ಸ್ಥಾನ ಗಳಿಸಿದ್ದ ಕಾಂಗ್ರೆಸ್ 99 ಸ್ಥಾನ ಗಳಿಸಿ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಮತ್ತೆ ಅಧಿಕಾರ ಹಿಡಿಯಲಿದೆ. ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿಯವರು ನಾಲ್ಕನೇ ಬಾರಿಗೂ ಪ್ರಧಾನಿಯಾಗುತ್ತಾರೆ ಎಂದರು.