ಖರ್ಗೆ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ
08:42 PM Apr 05, 2024 IST | Samyukta Karnataka
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಒಂದು ಕುಟುಂಬಕ್ಕೆ ಸೀಮಿತವಾದ ಪಕ್ಷ. ದಲಿತರ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಅವರನ್ನು ನೆಪಮಾತ್ರಕ್ಕೆ ಎಐಸಿಸಿ ಅಧ್ಯಕ್ಷರನ್ನಾಗಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು ಯಾರೇ ಪದಾಧಿಕಾರಿಯಾಗಬೇಕೆಂದರೂ ಗಾಂಧಿ ಕುಟುಂಬವೇ ಬೇಕು. ದಲಿತರ ಮೇಲೆ ಅಷ್ಟು ಪ್ರೀತಿ ಇದ್ದರೆ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಡಲಿ ಎಂದು ಸವಾಲು ಹಾಕಿದರು.
ರಾಹುಲ್ ಗಾಂಧಿಗೆ ೫೨ ವರ್ಷ. ಅವರ ಮುಂದೆ ಸಿದ್ದರಾಮಯ್ಯ ಅವರು ಟೊಂಕ ಬಗ್ಗಿಸಿ ನಿಲ್ಲುವುದೇಕೆ ಎಂದು ಪ್ರಶ್ನಿಸಿದರು. ತುಮಕೂರು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಅವರು ಶ್ರೀರಾಮನ ವಿರೋಧಿ ಎಂದು ಕಾಂಗ್ರೆಸ್ ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದರು.