For the best experience, open
https://m.samyuktakarnataka.in
on your mobile browser.

ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

07:11 PM Sep 01, 2024 IST | Samyukta Karnataka
ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ: ಗೌರಿ-ಗಣೇಶ ಹಬ್ಬದ ಆಚರಣೆಗೆ ಆಗಮಿಸುವವರು ಹಾಗೂ ರಜೆ ಮುಗಿಸಿ ಹಿಂದಿರುಗುವರು ಮತ್ತಿತರ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೆಪ್ಟೆಂಬರ್ ೫ರಿಂದ ೧೦ ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಈ ಬಾರಿ ಗೌರಿ-ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು ಸಾರ್ವಜನಿಕರು ಅದರಲ್ಲೂ ಪ್ರಮುಖವಾಗಿ ನೌಕರರಿಗೆ ಸಂಭ್ರಮ ಹೆಚ್ಚಿಸಿದೆ. ಸಪ್ಟೆಂಬರ್ ೬ರಂದು ಶುಕ್ರವಾರ ಗೌರಿ ಹಬ್ಬ, ೭ರಂದು ಶನಿವಾರ ಗಣೇಶ ಚತುರ್ಥಿ ಹಾಗೂ ೮ರಂದು ರವಿವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸಪ್ಟೆಂಬರ್ ೫ರಿಂದ ೧೦ರವರೆಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಹಬ್ಬದ ಆಚರಣೆಗಾಗಿ ಆಗಮಿಸುವವರ ಅನುಕೂಲಕ್ಕಾಗಿ ಸಪ್ಟೆಂಬರ್ ೫ ಮತ್ತು ೬ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅದೇ ರೀತಿ ಹಬ್ಬದ ರಜೆ ಮುಗಿಸಿಕೊಂಡು ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಸಪ್ಟೆಂಬರ್ ೮ರಂದು ರವಿವಾರ ಹಾಗೂ ೯ರಂದು ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ ೫ ರಿಂದ ೧೦ ರವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags :