ಚಾಮುಂಡೇಶ್ವರಿ ಆಸ್ತಿ ಯಥಾಸ್ಥಿತಿ: ಹೈಕೋರ್ಟ್ ಸೂಚನೆ
ಬೆಂಗಳೂರು: ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ಹೈಕೋರ್ಟ್ ನಿರ್ದೇಶನ ನೀಡಿತು.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಮೋದಾದೇವಿ ಒಡೆ ಯರ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ, ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ನಿರ್ದೇಶಿಸಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದರು.
ಮೊನ್ನೆಯಷ್ಟೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ ದ್ದರು.`’ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ಕ್ಷೇತ್ರದ ಆಸ್ತಿ, ವಜ್ರ ವೈಢೂರ್ಯ ಸರ್ಕಾರದ ಸುಪರ್ದಿಗೆ ಹೋಗಲಿದೆ. ಕ್ಷೇತ್ರದ ಧಾರ್ಮಿಕ ವಿಧಿ -ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು’’ ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್. ದೇವದಾಸ್ ವಾದ ಮಂಡಿಸಿದರು. ವಾದ-ಪ್ರತಿ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಸೆ.೨೫ಕ್ಕೆ ಮುಂದೂಡಿದರು. ಅಲ್ಲಿವರೆಗೆ ದೇಗುಲದ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕ ನಿರ್ದೇಶನ ನೀಡಿದರು.