For the best experience, open
https://m.samyuktakarnataka.in
on your mobile browser.

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು

09:38 PM Nov 27, 2023 IST | Samyukta Karnataka
ಜನಸ್ಪಂದನ ಕಾರ್ಯಕ್ರಮ  ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು

ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3500ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬೆಳಿಗ್ಗೆ 10ಗಂಟೆಗೆ ಆರಂಭಗೊಂಡು, ಜನಸ್ಪಂದನ‌ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು.
ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೇ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.
ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.