For the best experience, open
https://m.samyuktakarnataka.in
on your mobile browser.

ಜಿಲ್ಲಾಧಿಕಾರಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಶಾಸಕ ಕೋಟ್ಯಾನ್ ತೀರ್ಮಾನ

07:35 PM Sep 06, 2024 IST | Samyukta Karnataka
ಜಿಲ್ಲಾಧಿಕಾರಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಶಾಸಕ ಕೋಟ್ಯಾನ್ ತೀರ್ಮಾನ

ಮಂಗಳೂರು: ಕ್ಷೇತ್ರದ ಸರ್ಕಾರಿ ಕಾರ್ಯಕ್ರಮಗಳಲ್ಲಿ ತನ್ನನ್ನು ಅವಗಣಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದು ಮೂಲ್ಕಿ ಮೂಡುಬಿದರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.
ನಗರದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭೆ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ದೂರು ನೀಡಿರುವುದಾಗಿ ತಿಳಿಸಿದರು.
ಕಂಬಳ ಸಮಿತಿಯ ಅಧ್ಯಕ್ಷ ಆಯಾ ಕ್ಷೇತ್ರದ ಶಾಸಕನೇ ಆಗಬೇಕು ಎಂದು ಪ್ರೊಟೋಕಾಲ್ ಇದೆ. ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಕರೆ ಮಾಡಿ ಕಂಬಳ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇನೆ ಎಂದರು. ಕಳೆದ ನಾಲ್ಕನೇ ತಾರೀಕಿಗೆ ಮೀಟಿಂಗ್ ಆಯಿತು. ಅದರ ಬಗ್ಗೆಯೂ ನನಗೆ ಮಾಹಿತಿ ನೀಡಲಿಲ್ಲ. ಪಿಲಿಕುಳದಲ್ಲಿ ಜಿಲ್ಲಾಡಳಿತದ ವತಿಯಿಂದ ಕಂಬಳ ನಡೆಸಲು ತೀರ್ಮಾನವಾದ ಬಳಿಕ ನನಗೆ ಮಾಹಿತಿ ನೀಡಲಾಯಿತು. ಮಂಗಳೂರು ವಿಮಾನ ನಿಲ್ದಾಣ ಹಾಗೂ ಪರಿಸರದಲ್ಲಿ ಪ್ರವಾಹದಿಂದ ಸಮಸ್ಯೆ ಸಂಭವಿಸಿದ ಸಂದರ್ಭ ಜಿಲ್ಲಾಧಿಕಾರಿ ಭೇಟಿ, ಜಿಲ್ಲಾ ಉಸ್ತುವಾರಿ ಸಚಿವರ ಜತೆ ಪ್ರಾಕೃತಿಕ ವಿಪತ್ತು ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡದ ಸಂದರ್ಭದಲ್ಲಿ ಕೂಡ ಶಾಸಕನಾದ ತನಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿಲ್ಲ ಎಂದು ಅವರು ಆರೋಪಿಸಿದರು.
ಎಂಆರ್‌ಪಿಎಲ್ ನಾಲ್ಕನೇ ಹಂತದ ವಿಸ್ತರಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ, ಕ್ಷೇತ್ರದಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ಸಹಿತ ಪ್ರಮುಖ ಕಾರ್ಯಕ್ರಮಗಳಲ್ಲಿ ಜಿಲ್ಲಾಧಿಕಾರಿ ತನ್ನನ್ನು ದೂರವಿಟ್ಟಿದ್ದು, ತಾನು ಹಿಂದುಳಿದ ವರ್ಗದ ಶಾಸಕ ಎನ್ನುವ ಕಾರಣದಿಂದ ಜಿಲ್ಲಾಧಿಕಾರಿಯವರು ಅವಗಣಿಸಿದ್ದಾರೆಯೇ ಎಂದು ಪ್ರಶ್ನಿಸಿದರು. ಬಿಜೆಪಿ ಶಾಸಕರನ್ನು ಅವಗಣಿಸುತ್ತಿರುವ ಜಿಲ್ಲಾಧಿಕಾರಿ ಅವರ ವಿರುದ್ಧ ಗಣೇಶ ಚತುರ್ಥಿ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿಯವರು ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪರವಾಗಿ ಕೆಲಸ ಮಾಡಬೇಕು ಎನ್ನುವ ಆಲೋಚನೆ ಇದ್ದರೆ, ಶಶಿಕಾಂತ ಸೆಂಥಿಲ್ ಅವರಂತೆ ತನ್ನ ಹುದ್ದೆಗೆ ರಾಜೀನಾಮೆ ನೀಡಲಿ. ಆದರೆ ಸಸಿಕಾಂತ ಸೆಂಥಿಲ್ ಅವರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಇರುವಷ್ಟು ದಿನ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲೆಯ ಇತರ ಬಿಜೆಪಿ ಶಾಸಕರ ಪರಿಸ್ಥಿತಿಯೂ ಇದೇ ಆಗಿದೆ. ಆದರೆ ಉಮಾನಾಥ ಕೋಟ್ಯಾನ್ ಅವರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಆರೋಪಿಸಿದರು.

Tags :