For the best experience, open
https://m.samyuktakarnataka.in
on your mobile browser.

ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು

05:39 PM Aug 01, 2023 IST | Samyukta Karnataka
ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು

ಉಡುಪಿ: ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದ ಅವರು ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ - ರಾಜಕಾರಣ ಚುನಾವಣೆ ವೇಳೆ ಮಾತ್ರ.
ಅಧಿಕಾರಿಗಳು ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ, ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ಧರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗಾಗಿ ಕೆಲಸ ಮಾಡಲು ಸಾಕಷ್ಟು ಅಧಿಕಾರಿಗಳು ಇದ್ದಾರೆ. ಅಧಿಕಾರಿಗಳಿಗೆ ಸ್ಥಾನಮಾನ, ಸಂಬಳ, ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ. ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಕಡ್ಡಾಯವಾಗಿ ಭೇಟಿ ನೀಡಬೇಕು.
ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಬೇಕು. ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಬೇಕು. ಇದು ಸರ್ಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ-ಇಲ್ಲವೋ, ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ ಮಳೆಯಿಂದ ಬಿದ್ದ ಮನೆಗೆ ಕೂಡಲೇ ಪರಿಹಾರ ನೀಡಬೇಕು. ಸಂತ್ರಸ್ತರಿಗೆ ಮೊದಲು ಸೂರು ದೊರಕುವಂತಾಗಬೇಕು. ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಿ, ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು. ಬೆಳೆ ಹಾನಿ ಆದವರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು. ಒಮ್ಮೆ ಬೆಳೆ ಪರಿಹಾರ ಕೊಟ್ಟ ಬಳಿಕ ಪರ್ಯಾಯ ಬೆಳೆ ಬೆಳೆ ಬೆಳೆಯಲು ಅಗತ್ಯವಾದ ಬೀಜ, ಗೊಬ್ಬರ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಬೇಕು. ಅಡಿಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು. ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಕಾಲು ಸಂಕದಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಅಗತ್ಯವಿರುವ ಕಡೆ ಸೇತುವೆಗಳನ್ನು ನಿರ್ಮಿಸಬೇಕು. ನರೇಗಾ ಮತ್ತು ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಸೇತುವೆಗಳನ್ನು ನಿಮಿಸಲು ಯೋಜನೆ ಸಿದ್ದಪಡಿಸಿ ಮತ್ತು ಎರಡು ವರ್ಷಗಳಲ್ಲಿ ಸೇತುವೆ ನಿರ್ಮಾಣ ಕೆಲಸಗಳು ಮುಗಿಯುವ ರೀತಿಯಲ್ಲಿ ಕಾರ್ಯಪ್ರವೃತ್ತರಾಗಬೇಕು. 2015 ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18ನೇ ಸ್ಥಾನದಲ್ಲಿರುವುದಕ್ಕೆ ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುದು ಕಾರಣ. ಉಡುಪಿ ಸುಶಿಕ್ಷಿತರ ಜಿಲ್ಲೆ. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹೊಣೆ. ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು. ಇಲ್ಲದಿದ್ದರೆ ಕರ್ತವ್ಯದಿಂದ ಅಮಾನತು ಮಾಡಲಾಗುವುದು. ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ 13ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳು ಹೊಣೆ. ಮುಂದಿನ ಅವಧಿ ವೇಳೆಗೆ ಜಿಲ್ಲೆಯು ಶೈಕ್ಷಣಿಕ ಸೂಚ್ಯಂಕದಲ್ಲಿ ಕಡ್ಡಾಯವಾಗಿ ಏರುಗತಿಯಲ್ಲಿ ಸಾಗಬೇಕು, ಇಲ್ಲದಿದ್ದರೆ ಇದನ್ನು ಕರ್ತವ್ಯಲೋಪವೆಂದು ಪರಿಗಣಿಸಿ ಅಮಾನತು ಮಾಡಬೇಕಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ರಸ್ತೆ ಗುಂಡಿಗಳು, ಅಪಘಾತ ಮತ್ತು ಸಾವುಗಳ ಪ್ರಮಾಣ ಹಾಗೂ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ. ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕರ್ತವ್ಯ. ಉಡುಪಿ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ಕಾನೂನು ಸುವ್ಯವಸ್ಥೆ, ಮೂಲ ಸೌಕರ್ಯಗಳ ಕೊರತೆ ಆಗದಂತೆ ಎಲ್ಲ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜನರಿಗೆ ಸಕಾಲದಲ್ಲಿ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.