For the best experience, open
https://m.samyuktakarnataka.in
on your mobile browser.

ರಾಹುಲ್‌ನನ್ನು ಜನ ಒಪ್ಪಿಕೊಂಡಿದ್ದಾರೆ

07:50 PM Jun 04, 2024 IST | Samyukta Karnataka
ರಾಹುಲ್‌ನನ್ನು ಜನ ಒಪ್ಪಿಕೊಂಡಿದ್ದಾರೆ

ಬೆಂಗಳೂರು: ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚುನಾವಣಾ ಫಲಿತಾಂಶದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ ಎಂದರು.
ಇಡೀ ದೇಶದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದರೂ ಬಿಜೆಪಿ ಮತ ಪ್ರಮಾಣ ಕುಸಿದಿದೆ. ಕಾಂಗ್ರೆಸ್ ಕಡಿಮೆ ಸೀಟು ಗೆದ್ದರೂ ಮತ ಪ್ರಮಾಣ ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.
ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ. 45.34, ಬಿಜೆಪಿ ಶೇ. 46.04ರಷ್ಟು ಮತ ಪಡಿದಿದೆ. 2019ರಲ್ಲಿ ಬಿಜೆಪಿ ಶೇ. 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ. 31.88ರಷ್ಟು ಮಾತ್ರ ಮತಗಳು ಬಂದಿದ್ದವು. 2019ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ. 5ರಷ್ಟು ಕುಸಿದಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್ ಕೂಡ 2019ಕ್ಕಿಂತ ಕಡಿಮೆ ಪ್ರಮಾಣದ ಮತ ಪಡೆದಿದೆ. ಆದರೂ ನಾವು ನಿರೀಕ್ಷಿತ ಪ್ರಮಾಣದಲ್ಲಿ ಸೀಟು ಗೆದ್ದಿಲ್ಲ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ಕೇಂದ್ರದಲ್ಲಿ ಅಧಿಕಾರಿದಲ್ಲಿದ್ದ ಬಿಜೆಪಿ ಮೋದಿ ಮುಖ 2014-2019ಕ್ಕಿಂತ ಕಡಿಮೆ ಸೀಟು ಕಡಿಮೆ ಗಳಿಸಿದ್ದಾರೆ. ಮೋದಿ ಮುಖ ನೋಡಿಯೂ ಬಿಜೆಪಿಗೆ ಬಹುಮತ ಬಂದಿಲ್ಲ. ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ ಎಂದರು.
ಬಿಜೆಪಿ ಸರಳ ಬಹುಮತ ಪಡೆಯುವಲ್ಲೂ ಸೋತಿದೆ. ದೇಶದಲ್ಲಿ ಎಲ್ಲೂ ಮೋದಿಯವರ ಅಲೆ ಕಾಣಲಿಲ್ಲ. ಹೀಗಾಗಿ ಈ ಫಲಿತಾಂಶ ಮೋದಿ ಜನಪ್ರಿಯತೆ ನೆಲಕಚ್ಚಿದೆ ಎನ್ನುವುದು ಮೇಲು ನೋಟಕ್ಕೆ ಗೊತ್ತಾಗಿದೆ. ಸರ್ಕಾರ ಯಾರು ಮಾಡ್ತಾರೆ ಎನ್ನುವುದು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.
ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. NDA ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದರು.
ಈ ಸೋಲಿನ ಕಾರಣದಿಂದ ಮೋದಿಯವರಿಗೆ ಮತ್ತೆ ಪ್ರಧಾನಿ ಆಗುವ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು. ED, IT, CBI ಹೆಸರಲ್ಲಿ ಹೆದರಿಸಿದರು, ಬೆದರಿಸಿದರು ಆದರೂ ದೇಶದ ಜನ ಬಿಜೆಪಿಗೆ ಬಹುಮತ ಕೊಡಲಿಲ್ಲ. ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು ಎಂದರು.