For the best experience, open
https://m.samyuktakarnataka.in
on your mobile browser.

ಲಕ್ಷ್ಮಣ ಸವದಿ ಕಾಂಗ್ರೆಸ್ ಬಿಡಲ್ಲ

09:26 PM Feb 05, 2024 IST | Samyukta Karnataka
ಲಕ್ಷ್ಮಣ ಸವದಿ ಕಾಂಗ್ರೆಸ್ ಬಿಡಲ್ಲ

ಬೆಳಗಾವಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿಯವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲಕ್ಷ್ಮಣ ಸವದಿಯವರು ಬಿಜೆಪಿಗೆ ಹೋಗುತ್ತಾರೆಂಬ ವಿಷಯ ಖಂಡಿತ ತಮ್ಮ ಗಮನಕ್ಕೆ ಬಂದಿಲ್ಲ. ಅವರು ಕಾಂಗ್ರೆಸ್ಸಿಗೆ ಬರುವ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಪಾತ್ರ ನಿರ್ವಹಿಸಿದ್ದೆವು. ಏನೇ ಹೇಳಿದರೂ ಯಾವುದೇ ಕಾರಣಕ್ಕೂ ಲಕ್ಷ್ಮಣ ಸವದಿಯವರು ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.
ದೆಹಲಿಯ ಪ್ರತಿಭಟನೆಗೆ ಬೆಳಗಾವಿ ಜಿಲ್ಲೆಯಿಂದ ೧೧ ಶಾಸಕರು, ಇಬ್ಬರು ವಿಧಾನ ಪರಿಷತ್ ಸೇರಿದಂತೆ ನಾನು ಮತ್ತು ಸಚಿವರಾದ ಸತೀಶ್ ಜಾರಕಿಹೊಳಿ ತೆರಳುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ಸಿನ ೧೩೬ ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಎಲ್ಲರೂ ಒಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.
ಅಂಕಿ ಅಂಶಗಳ ಸಮೇತ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ, ರಾಜ್ಯದಲ್ಲಿ ಸದ್ಯ ಉಂಟಾಗಿರುವ ಬರ ಪರಿಸ್ಥಿತಿಯಲ್ಲೂ ಜನರ ಸಹಾಯ, ಸಹಕಾರಕ್ಕೆ ಕೇಂದ್ರ ಬರಲಿಲ್ಲವೆಂದರೆ ಹೇಗೆ? ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವಾ? ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದರು.
ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸುತ್ತಿದೆಯೇ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವೆ ಹೆಬ್ಭಾಳಕರ್, ಅದನ್ನು ನನ್ನ ಬಾಯಿಂದ ಏಕೆ ಹೇಳಿಸುತ್ತೀರಿ ? ಎಂದು ಮಾಧ್ಯಮಗಳಿಗೆ ಮರುಪ್ರಶ್ನೆ ಹಾಕಿದರಲ್ಲದೆ, ಕೇಂದ್ರ, ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎನ್ನುವುದು ಜಗತ್ ಜಾಹೀರವಾದುದು ಎಂದು ಹೇಳಿದರು.