For the best experience, open
https://m.samyuktakarnataka.in
on your mobile browser.

ಧರ್ಮ ಇರುವುದು ನಮಗಾಗಿ, ನಾವು ಧರ್ಮಕ್ಕಾಗಿ ಅಲ್ಲ

05:30 PM Nov 29, 2023 IST | Samyukta Karnataka
ಧರ್ಮ ಇರುವುದು ನಮಗಾಗಿ  ನಾವು ಧರ್ಮಕ್ಕಾಗಿ ಅಲ್ಲ

ಹಾವೇರಿ: ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಕಾಗಿನೆಲೆ ಮಹಾಸಂಸ್ಥಾನ ಕನಕ‌ ಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು "ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು.
ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಶ್ರೀ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ.
ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು - ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು.
ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು.
ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, "ಇವ ನಮ್ಮವ ಇವ ನಮ್ಮವ" ಎಂದಿದ್ದು. ಕುವೆಂಪು ಅವರು, "ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು" ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು, ಅಂಬೇಡ್ಕರ್, ಕುವೆಂಪು, ಸೂಫಿಗಳ ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.