ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ

02:02 PM Jan 25, 2024 IST | Samyukta Karnataka

ಕಲಬುರಗಿ; ಶಕ್ತಿ ಯೊಜನೆ ಪರಿಣಾಮ ರಾಜ್ಯದಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಸಾರಿಗೆ ಬಸ್ ಒದಗಿಸುವ ದೃಷ್ಠಿಯಿಂದ ಬರುವ ಮಾರ್ಚ್ ಅಂತ್ಯಕ್ಕೆ ರಾಜ್ಯದ ನಾಲ್ಕು ನಿಗಮಗಳಿಗೆ 5,800 ಬಸ್ ಖರೀದಿಸಲಾಗುತ್ತಿದೆ ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ 20 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆ ಕುರಿತು ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದರು. ಈಗ ಯೋಜನೆ ಜಾರಿಯಾಗಿದೆ. ಕಳೆದ 8 ತಿಂಗಳ ಅವಧಿಯಲ್ಲಿ 139 ಕೋಟಿ ಜನ ಸಂಚಾರ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆ ಇದಾಗಿದೆ ಎಂದು ಬಣ್ಣಿಸಿದರು. ಕೆ.ಕೆ.ಆರ್.ಟಿ.ಸಿ. ಸಂಸ್ಥೆಗೆ ಈಗಾಗಲೆ 630 ಬಸ್ ನೀಡಲಾಗಿದೆ. ಮುಂದಿನ ದಿನದಲ್ಲಿ ಮತ್ತೆ 485 ಬಸ್ ನೀಡಲಾಗುವುದು. ರಾಜ್ಯದಲ್ಲಿ 2016ರ ನಂತರ 13,888 ಜನ ನಿವೃತ್ತಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ. 9 ಸಾವಿರ ಸಿಬ್ಬಂದಿ ನೇಮಕಕ್ಕೆ ಸಿ.ಎಂ. ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ. ಕೆ.ಎಸ್.ಆರ್.ಟಿ.ಸಿ ಮತ್ತು ಕೆ.ಕೆ.ಆರ್.ಟಿ.ಸಿ. ಸಂಸ್ಥೆಯಲ್ಲಿನ ಸಾರಿಗೆ ನೌಕರರು ಅಪಘಾತದಲ್ಲಿ ಮರಣ ಹೊಂದಿದಲ್ಲಿ 1 ಕೋಟಿ ರೂ. ಜೀವ ವಿಮೆ ಒದಗಿಸುವ ಯೋಜನೆ ಜಾರಿಗೊಳಿಸಿದ್ದು, ಇದು ದೇಶದಲ್ಲಿಯೆ ಮಾದರಿಯಾಗಿದೆ. ಒಂದೆಡೆ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಬೇಕು. ಇನ್ನೊಂದೆಡೆ ಕಾರ್ಮಿಕರ ಹಿತವು ಕಾಯಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ ಎಂದರು. ಇತ್ತೀಚೆಗೆ ನಡೆದ ಮಂಡಳಿ ಸಭೆಯಲ್ಲಿ ಈಶಾನ್ಯ ಭಾಗದ ಜಿಲ್ಲೆಗಳು ಬೆಂಗಳೂರಿಗೆ 600 ಕಿ.ಮೀ. ದೂರದಲ್ಲಿರುವ ಕಾರಣ ಮತ್ತು ಓಡಾಟ ಹೆಚ್ಚಿರುವುದರಿಂದ ವೋಲ್ವೋ, ಎ.ಸಿ. ಬಸ್‍ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಓಡಿಸುವಂತೆ ಎಂ.ಡಿ. ಅವರಿಗೆ ಸೂಚನೆ ನೀಡಿದ್ದೇನೆ. ಪರಿಣಾಮ ಇಂದಿಲ್ಲಿ ಎ.ಸಿ./ ನಾನ್ ಎ.ಸಿ. ಸ್ಲೀಪರ್ ಬಸ್‍ಗಳಿಗೆ ಚಾಲನೆ ನೀಡಿದ್ದೇವೆ ಎಂದರು. ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ ಹಿಂದೆ ತಾವು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾಗಿದ್ದಾಗ 5 ಕೋಟಿ ರೂ. ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ನೀಡಿದೆ. ಮುಂದೆ ಮಂಡಳಿಯಿಂದ ಉಳಿದ 15 ಕೋಟಿ ರೂ. ನೀಡಿ ಸುಸಜ್ಜಿತ ಬಸ್ ನಿಲ್ದಾಣ ಪೂರ್ಣಗೊಳಿಸಲಾಗಿದೆ. ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ನಿರ್ಮಾಣದಿಂದ ವಿವಿಧ ಗ್ರಾಮೀಣ ಭಾಗದಿಂದ ನಗರಕ್ಕೆ ಓಡಾಡುವ ಹಳ್ಳಿ ಜನರಿಗೆ ತುಂಬಾ ಅನುಕೂಲವಾಗಿದೆ ಎಂದರು. ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಮಾತನಾಡಿ, ಮಂಡಳಿಯಿಂದಲೆ 20 ಕೋಟಿ ರೂ. ವೆಚ್ಚದಲಿತೀ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಕೆ.ಕೆ.ಆರ್.ಟಿ.ಸಿ ಸಂಸ್ಥೆಗೆ 120 ಬಸ್ ಖರೀದಿಗೆ ಮಂಡಳಿಯಿಂದ 50 ಕೋಟಿ ರೂ. ನೀಡಲಾಗುವುದು. ಇತ್ತೀಚೆಗೆ ಮಂಡಳಿಯಲ್ಲಿ ಒಂದು ನಿರ್ಣಯ ತೆಗೆದುಕೊಂಡಿದ್ದು ಶೇ.1/3 ಭಾಗ ಮಂಡಳಿ ಅನುದಾನ ನೀಡಿದರೆ, ಉಳಿದ 2/3 ಭಾಗ ಸಂಬಂಧಪಟ್ಟ ಇಲಾಖೆ ನೀಡಬೇಕು. ಹೀಗಾಗಿ ಬಸ್ ಖರೀದಿಗೆ ಉಳಿದ ಹಣ ಸರ್ಕಾರ ನೀಡಬೇಕೆಂದು ಸಚಿವ ರಾಮಲಿಂಗಾರೆಡ್ಡಿಗೆ ಅವರಿಗೆ ಕೋರಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ ಕಲಬುರಗಿ ಮಹಾನಗರ ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿನಿತ್ಯ 1,200 ಬಸ್ ನಿರಂತರ ಕಾರ್ಯಾಚರಣೆ ಮಾಡುತ್ತಿವೆ. ಪರಿಣಾಮ ನಗರದಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಪರಿಸರ ಮಾಲಿನ್ಯ ಹೆಚ್ಚಿದೆ. ಇದನ್ನು ತಡೆಯಲು ಕಲಬುರಗಿ ನಗರದ ನಾಲ್ಕು ರಿಂಗ್ ರಸ್ತೆಯಲ್ಲಿ ಅಂದರೆ ಜೇವರ್ಗಿ ರಸ್ತೆ, ಹುಮನಾಬಾದ ರಸ್ತೆ, ಆಳಂದ ರಸ್ತೆ, ಸೇಡಂ ರಸ್ತೆಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಿಕೊಂಡರು.

ಮುಖ್ಯಮಂತ್ರಿ ಚಿನ್ನದ ಪದಕ ವಿತರಣೆ: ಕಾರ್ಯಕ್ರಮದಲ್ಲಿ ಅಪಘಾತ ರಹಿತ ಸೇವೆ ಸಲ್ಲಿಸಿದ 6 ಜನರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಮತ್ತು ಕಲಬುರಗಿ ವಿಭಾಗ-1 ಹಾಗೂ 2ರ 121 ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಭಾಗವಾಗಿ ಸಾಂಕೇತಿಕವಾಗಿ ಇಬ್ಬರಿಗೆ ಬೆಳ್ಳಿ ಪದಕ ವಿತರಿಸಲಾಯಿತು. ಇದಲ್ಲದೆ ಎಜಾಜ್ ಅಹ್ಮದ್, ರೇವಣಸಿದ್ದಪ್ಪ ಅವರಿಗೆ ಅನುಕಂಪದ ನೇಮಕಾತಿ ಅದೇಶ ಪತ್ರ ನೀಡಲಾಯಿತು. ನಿಗಮದಲ್ಲಿ ಸೇವಾ ಅವಧಿಯಲ್ಲಿ ಮೃತಪಟ್ಟ 8 ಜನ ಅಧಿಕಾರಿ-ಸಿಬ್ಬಂದಿಗಳ ಅವಲಂಭಿತರಿಗೆ ತಲಾ 10 ಲಕ್ಷ ರೂ.ಗಳಂತೆ ಒಟ್ಟು 80 ಲಕ್ಷ ರೂ. ಗಳ ಆಂತರಿಕ ಗುಂಪು ವಿಮಾ ಪರಿಹಾರದ ಚೆಕ್‍ಗಳನ್ನು ಸಹ ವಿತರಣೆ ಮಾಡಲಾಯಿತು.

ಕಲ್ಯಾಣ ರಥಕ್ಕೆ ಚಾಲನೆ: ಸಮಾರಂಭಕ್ಕು ಮುನ್ನ ಸಚಿವ ರಾಮಲಿಂಗಾರೆಡ್ಡಿ ಅವರು ಕಲ್ಯಾಣ ರಥ (ಎ.ಸಿ. ಸ್ಲೀಪರ್) ಮತ್ತು ಅಮೋಘವರ್ಷ (ನಾನ್ ಎ.ಸಿ. ಸ್ಲೀಪರ್) ಬಸ್ಸುಗಳ ಲೋಕಾರ್ಪಣೆ ಮಾಡಿದರು.

ಬಸ್ ನಿಲ್ದಾಣ ಒಳನೋಟ: ಎರಡು ಅಂತಸ್ತಿನ ಈ ಬಸ್ ನಿಲ್ದಾಣವನ್ನು ಪ್ರಸ್ತುತ ನೆಲ ಮಹಡಿ ಮಾತ್ರ ನಿರ್ಮಿಸಲಾಗಿದ್ದು, ಇದಕ್ಕಾಗಿ 20 ಕೋಟಿ ರೂ. ವೆಚ್ಚ ಮಾಡಲಾಗಿದೆ. ವಿಸ್ತೀರ್ಣ 4,455 ಚ.ಮೀ ಇದೆ. ಏಕಕಾಲದಲ್ಲಿ 12 ಬಸ್ ನಿಲುಗಡೆ ಮಾಡಬಹುದಾಗಿದೆ. ಒಟ್ಟಾರೆ 9 ಅಂಕಣಗಳಿವೆ. ಇದಲ್ಲದೆ ವಾಣಿಜ್ಯ ಸಂಕೀರ್ಣ, ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನವನ ಒಳಗೊಂಡಿದೆ. ಬಸ್ ನಿಲ್ದಾಣದಿಂದ ಪ್ರತಿನಿತ್ಯ 450 ಬಸ್ ಟ್ರಿಪ್ ಮಾಡಬಹುದಾಗಿದೆ.

ಸಮಾರಂಭದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಕನೀಜ್ ಫಾತಿಮಾ, ಎಂ.ಎಲ್.ಸಿ. ತಿಪ್ಪಣ್ಣಪ್ಪ ಕಮಕನೂರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತೆ ರೂಪಿಂದರ್ ಕೌರ್, ಕೆ.ಕೆ.ಆರ್.ಟಿ.ಸಿ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ ಕುಮಾರ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ದೇವರಾಜ, ಸಿ.ಎಂ.ಇ ಸಂತೋಷಕುಮಾರ ಗೊಗೋರೆ, ಮುಖ್ಯ ಭದ್ರತಾ ಮತ್ತು ವಿಜಿಲೆನ್ಸ್ ಅಧಿಕಾರಿ ಆನಂದ ಬಂದರಕಳ್ಳಿ, ಮುಖ್ಯ ಲೆಕ್ಕಾಧಿಕಾರಿ ಬಸವರಾಜ ಬೆಳಗಾವಿ, ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಈಶ್ವರ ಹೊಸಮನಿ, ಗಂಗಾಧರ, ಡಿ.ಸಿ.ಸಿ. ಅಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಇತರೆ ಅಧಿಕಾರಿಗಳು, ಸಾರಿಗೆ ಸಿಬ್ಬಂದಿಗಳು ಇದ್ದರು. ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಸರ್ವರನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.

Next Article