ಲೋಕಸಭೆಯಲ್ಲಿ ನೀಟ್ ವಿವಾದ ಪ್ರಸ್ತಾಪಿಸಿದ ರಾಹುಲ್: ಪ್ರತ್ಯುತ್ತರ ನೀಡಿದ ಧರ್ಮೇಂದ್ರ
ನವದೆಹಲಿ: ನೀಟ್ ಪರೀಕ್ಷೆ ಅಕ್ರಮ ಕುರಿತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಂಸತ್ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ.
ಸೋಮವಾರದಿಂದ ಬಜೆಟ್ ಅಧಿವೇಶನದ ಕಲಾಪ ಆರಂಭವಾಗುತ್ತಲೇ ರಾಹುಲ್ ಗಾಂಧಿ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಪ್ರಸ್ತಾಪಿಸಿ ದೇಶಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಗಂಭೀರ ಸಮಸ್ಯೆ ಇದೆ ಎಂಬುದು ದೃಢವಾಗಿದೆ. ಇದು ನೀಟ್ ಮಾತ್ರವಲ್ಲ, ಎಲ್ಲ ಪ್ರಮುಖ ಪರೀಕ್ಷೆಗಳ ವ್ಯವಸ್ಥೆಯಲ್ಲೂ ಲೋಪದೋಷವಿದೆ. ಆದರೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮೊಬ್ಬರನ್ನು ಬಿಟ್ಟು ಎಲ್ಲರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಏನು ನಡೆಯುತ್ತಿದೆ, ಯಾವ ಮೂಲಭೂತ ಸಮಸ್ಯೆಯು ವಿದ್ಯಾರ್ಥಿಗಳನ್ನು ಕಾಡುತ್ತಿದೆ ಎಂಬುದೇ ಧರ್ಮೇಂದ್ರ ಪ್ರಧಾನ್ ಅವರಿಗೆ ಅರ್ಥವಾಗಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ದೇಶದ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಂದರೆಯಾಗುತ್ತಿದೆ” ಎಂದು ಹೇಳಿದರು.
ರಾಹುಲ್ ಗಾಂಧಿ ಆರೋಪಗಳಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರತ್ಯುತ್ತರ ನೀಡಿರುವ ಅವರು ಒಂದು ಸುಳ್ಳನ್ನು ಪದೇಪದೆ ಹೇಳಿದರೆ ಅದು ಸತ್ಯವಾಗುವುದಿಲ್ಲ. ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳೇ ಇಲ್ಲ. ನೀಟ್ ಪ್ರಕರಣವು ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಸುಮಾರು 240ಕ್ಕೂ ಹೆಚ್ಚಿನ ಪರೀಕ್ಷೆಗಳನ್ನು ಜವಾಬ್ದಾರಿಯಿಂದ ನಡೆಸಲಾಗಿದೆ ಎಂಬುದಾಗಿ ನಾನು ಸ್ಪಷ್ಟಪಡಿಸುತ್ತೇನೆ ಎಂದರು.