ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂಸದೆ ಸುಮಲತಾ ಮೌನಕ್ಕೆ ಶರಣು

11:19 PM Mar 16, 2024 IST | Samyukta Karnataka

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯು ಮಿತ್ರಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ಹೆಜ್ಜೆ ಕುತೂಹಲ ಮೂಡಿಸಿದೆ.
ಯಾವುದೇ ಹೇಳಿಕೆ ನೀಡದೆ ಸುಮಲತಾ ಮೌನಕ್ಕೆ ಶರಣಾಗಿದ್ದು, ಬೆಂಬಲಿಗರೊಂದಿಗೆ ಸಭೆಗಳನ್ನು ನಡೆಸುವ ಮೂಲಕ ಮುಂದೇನು ಮಾಡಬೇಕು ಎಂಬ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಪ್ರಧಾನಿ ಮೋದಿ ನಾಯಕತ್ವ ಬೆಂಬಲಿಸಿ ಹಲವು ತಿಂಗಳುಗಳ ಹಿಂದೆಯೇ ಬಿಜೆಪಿಯನ್ನು ಬೆಂಬಲಿಸಿದ್ದರು.
ಯಾವುದೇ ಕಾರಣಕ್ಕೂ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಬೇಡ ಎಂಬ ಅಭಿಪ್ರಾಯವನ್ನು ಬಿಜೆಪಿಯ ರಾಜ್ಯ ನಾಯಕರೂ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿವರೆಗೆ ಎಲ್ಲರಿಗೂ ಮನವಿ ಮಾಡಿದ್ದರು. ಆದರೂ, ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದ ಬಿಜೆಪಿ ರಾಷ್ಟ್ರೀಯ ನಾಯಕರು ಕೊನೆಗೂ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡುವ ತೀರ್ಮಾನ ಕೈಗೊಂಡರು.
ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿರುವುದರಿಂದ ಇದೀಗ ಸುಮಲತಾ ಅವರು ಆ ಪಕ್ಷಕ್ಕೂ ವಲಸೆ ಹೋಗುವಂತಿಲ್ಲ. ಎರಡನೇ ಬಾರಿ ಪಕ್ಷೇತರ ಸದಸ್ಯೆಯಾಗಿ ಕಣಕ್ಕಿಳಿಯುವುದೊಂದೇ ಉಳಿದಿರುವ ದಾರಿ. ಅದು ಬೇಡ ಎಂದರೆ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿ ಪರ್ಯಾಯ ಹಾದಿಯನ್ನು ಕಂಡುಕೊಳ್ಳಬೇಕಾಗುತ್ತದೆ.
ಈ ಹಿಂದೆ ಸುಮಲತಾ ಅವರು ಬೆಂಗಳೂರು ಉತ್ತರಕ್ಕೆ ಸ್ಥಳಾಂತರಗೊಳ್ಳುತ್ತಾರೆ ಎಂಬ ವದಂತಿ ಹಬ್ಬಿತ್ತು. ಆಗಲೇ ಅವರು ಮಂಡ್ಯ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈಗ ಅವರು ಮನಸ್ಸು ಮಾಡಿದರೂ ಅವಕಾಶ ಇಲ್ಲದಂತಾಗಿದೆ. ಆ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ರಾಜ್ಯಸಭೆಗೆ ಹೋಗುವ ಅವಕಾಶವನ್ನು ಬಿಜೆಪಿ ನೀಡಬಹುದು. ಅದು ಆಗದಿದ್ದರೆ ಮುಂಬರುವ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ನಡೆಯುವ ಚುನಾವಣೆಯಲ್ಲಿ ಸುಲಭವಾಗಿ ಪರಿಷತ್ತಿಗೆ ಪ್ರವೇಶ ಪಡೆಯಬಹುದು. ಅಥವಾ ಇನ್ನೂ ಘೋಷಣೆಯಾಗದ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಕೇಳಬಹುದು ಎನ್ನಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಕ್ಕಲಿಗರು ಮತ್ತು ಬಲಿಜಿ ಸಮುದಾಯದ ಮತದಾರರು ನಿರ್ಣಾಯಕರಾಗಿದ್ದಾರೆ. ಪತಿ ಅಂಬರೀಶ್ ಅವರು ಒಕ್ಕಲಿಗರಾಗಿದ್ದು, ಸುಮಲತಾ ಅವರು ಬಲಿಜ ಸಮುದಾಯಕ್ಕೆ ಸೇರಿದವರು. ಈಗ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಹಾಲಿ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಇವರಿಬ್ಬರ ಬದಲು ಸುಮಲತಾ ಅವರನ್ನು ಕಣಕ್ಕಿಳಿಸಬಹುದು ಎಂಬ ಚರ್ಚೆಯೂ ಬಿಜೆಪಿಯಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Next Article