For the best experience, open
https://m.samyuktakarnataka.in
on your mobile browser.

4,860 ಕೋಟಿ ರೂ. ಪರಿಹಾರ ಕೋರಿದ ಸಿದ್ದರಾಮಯ್ಯ

03:45 PM Oct 06, 2023 IST | Samyukta Karnataka
4 860 ಕೋಟಿ ರೂ  ಪರಿಹಾರ ಕೋರಿದ ಸಿದ್ದರಾಮಯ್ಯ

ಚಿತ್ರದುರ್ಗ: ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು "ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಿದ್ದೇವೆ.
ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿದೆ. ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ.
ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿನ ಸಂಗ್ರಹವಿಲ್ಲ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ.
ಹಿಂದಿನ ರಾಜ್ಯ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5,300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ. ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.